ಮಂಗಳೂರು, ಸೆಪ್ಟೆಂಬರ್ 07, 2025: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಸ್ಟ್ 29, 2025ರ ರಾತ್ರಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಬಂಧಿತ ಆರೋಪಿ ಎಂದು ಮಂಗಳೂರು ನಗರ ಪೊಲೀಸ್ ಆಯಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆಗಸ್ಟ್ 29ರ ರಾತ್ರಿ, ಅನಾಮಿಕ ವ್ಯಕ್ತಿಯೋರ್ವ ವಿಮಾನ ನಿಲ್ದಾಣದ ಟರ್ಮಿನಲ್ ವ್ಯವಸ್ಥಾಪಕರಿಗೆ ಕರೆ ಮಾಡಿ, “ಟರ್ಮಿನಲ್ ಕಟ್ಟಡವನ್ನು ತಕ್ಷಣ ಖಾಲಿ ಮಾಡಿ, ಇಲ್ಲವಾದರೆ ಧ್ವಂಸ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದ. ಈ ಘಟನೆಯ ಬಗ್ಗೆ ಟರ್ಮಿನಲ್ ವ್ಯವಸ್ಥಾಪಕರು ಬಜ್ಪೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಕಲಂ 351(2), 351(3) ಮತ್ತು 1982ರ ನಾಗರಿಕ ವಿಮಾನಯಾನ ಸುರಕ್ಷತೆ ವಿರುದ್ಧದ ಅಕ್ರಮ ಚಟುವಟಿಕೆ ತಡೆ ಕಾಯ್ದೆಯ ಕಲಂ 3(1)(d) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆಯಲ್ಲಿ ತೊಡಗಿದ ಬಜ್ಪೆ ಪೊಲೀಸರು ಆರೋಪಿ ಸಸಿಕುಮಾರ್ನನ್ನು ವೆಲ್ಲೂರಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಸಿಕುಮಾರ್, “ದೇಶದ ವಿವಿಧ ವಿಮಾನ ನಿಲ್ದಾಣಗಳ ಸಂಪರ್ಕ ಸಂಖ್ಯೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹುಡುಕಿ, ಕರೆ ಮಾಡಿ ಬೆದರಿಕೆ ಹಾಕುತ್ತಿದ್ದೆ. ಅದೇ ರೀತಿ ಮಂಗಳೂರು ವಿಮಾನ ನಿಲ್ದಾಣಕ್ಕೂ ಕರೆ ಮಾಡಿದ್ದೆ” ಎಂದು ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.