ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಇಂದು ದಿನಾಂಕ: 19/08/2025 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆಯನ್ನು ನೀಡಲಾಗಿದೆ..
ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ. ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ ಹಾಗೂ ದಿನಾಂಕ:18.08.2025 ರಿಂದ ದಿನಾಂಕ:19.08.2025 ಎರೆಡು ದಿನಗಳವರೆಗೂ Red Alert ಇದ್ದು ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು ಮತ್ತು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು.
ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಗೆಲ್ಲು/ರಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.
ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ ಹಾಗಾಗಿ ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂಧಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯೆ ಉಳಿಯಬಹುದು.
ಮುಂದಿನ 7 ದಿನಗಳಲ್ಲಿ ಹೆಚ್ಚು ಗಾಳಿಯೊಂದಿಗೆ ಮಳೆ ಬರುವುದರಿಂದ ಸಾರ್ವಜನಿಕರು ಅನಗತ್ಯ ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ವಾಸಿಸಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆಮಾಡಬಹುದು.
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು/ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು/ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ಸೂಚಿಸಲಾಗಿದೆ.
